Saturday, September 12, 2026
Home ಸುದ್ದಿಗಳು Accident: ಕರಾಳ ಶಿವರಾತ್ರಿ; ಕಾರು-ಬಸ್ ಮುಖಾಮುಖಿ ಡಿಕ್ಕಿ, ಐವರು ದುರ್ಮರಣ!

Accident: ಕರಾಳ ಶಿವರಾತ್ರಿ; ಕಾರು-ಬಸ್ ಮುಖಾಮುಖಿ ಡಿಕ್ಕಿ, ಐವರು ದುರ್ಮರಣ!

Accident: ಕರಾಳ ಶಿವರಾತ್ರಿ; ಕಾರು-ಬಸ್ ಮುಖಾಮುಖಿ ಡಿಕ್ಕಿ, ಐವರು ದುರ್ಮರಣ!

ಬೆಂಗಳೂರು: ಮಹಾಶಿವರಾತ್ರಿಯ ಸಂಭ್ರಮದ ನಡುವೆಯೇ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಜಿಂದಾಲ್ ಕಾರ್ಖಾನೆ ಸಮೀಪ ಸಂಭವಿಸಿದ ಭೀಕರ ರಸ್ತೆ Accidentನಲ್ಲಿ ಐವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದು, ಕುಟುಂಬಗಳ ಪಾಲಿಗೆ ಈ ಬಾರಿಯ ಶಿವರಾತ್ರಿ ಕರಾಳವಾಗಿ ಪರಿಣಮಿಸಿದೆ.

Accident ನಡೆದಿದ್ದು ಹೇಗೆ?

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಅತೀ ವೇಗವಾಗಿ ಬರುತ್ತಿದ್ದ ಇಂಡಿಕಾ ಕಾರು, ನೆಲಮಂಗಲದ ಜಿಂದಾಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದೆ. ಅತಿ ವೇಗದ ಪರಿಣಾಮವಾಗಿ ಕಾರು ರಸ್ತೆಯ ಮಧ್ಯದ ಡಿವೈಡರ್ ದಾಟಿ ಪಕ್ಕದ ರಸ್ತೆಗೆ ಹಾರಿದೆ. ಇದೇ ಸಮಯದಲ್ಲಿ ಬೆಂಗಳೂರಿನಿಂದ ಹೊರಟಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಯುವಕರು ಕೊನೆಯುಸಿರೆಳೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಆತನು ಮೃತಪಟ್ಟಿದ್ದಾನೆ.

ಮೃತರ ಹಿನ್ನೆಲೆ:

ಈ ಭೀಕರ Accidentನಲ್ಲಿ ಮೃತಪಟ್ಟವರಲ್ಲಿ ಇಬ್ಬರನ್ನು ದೊಡ್ಡಬಳ್ಳಾಪುರ ಮೂಲದ ಹರ್ಷಿತ್ ಮತ್ತು ನಿಖಿತ್ ಎಂದು ಗುರುತಿಸಲಾಗಿದೆ. ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದು, ರಾತ್ರಿ 8:30ರ ಸುಮಾರಿಗೆ “ಸ್ನೇಹಿತನನ್ನು ಭೇಟಿ ಮಾಡಿ ಬರುತ್ತೇನೆ” ಎಂದು ಮನೆಯಿಂದ ಹೊರಬಂದಿದ್ದನು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಉಳಿದ ಮೂವರು ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸ್ಥಳದಲ್ಲಿ ಕರುಳು ಹಿಂಡುವ ದೃಶ್ಯ:

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯ ಮುಂದೆ ಮಗನ ಮೃತದೇಹ ಕಂಡು ಹರ್ಷಿತ್ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ನೆರೆದಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿತು. ಕಳೆದ ಶುಕ್ರವಾರವಷ್ಟೇ ಹೊಸಕೋಟೆ ಬಳಿ ನಡೆದ ಅಪಘಾತದಲ್ಲಿ ಏಳು ಜನರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಈ ದುರಂತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಈ ಭೀಕರ ದುರಂತಕ್ಕೆ ಕಾರಣವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ವತಂತ್ರ ಮಾಧ್ಯಮ ಬೆಂಬಲಿಸಿ

ಯಾರ ಹಂಗೂ ಇಲ್ಲದ, ಯಾರಿಗೂ ಬಗ್ಗದ ಸ್ವತಂತ್ರ ಮಾಧ್ಯಮಕ್ಕೆ ನಿಮ್ಮ ಬೆಂಬಲದ ಅವಶ್ಯಕತೆ ಇದೆ...